ಕಟಕ್: ಒಡಿಶಾದ ಪ್ರತಿಷ್ಠಿತ ಎಸ್ಸಿಬಿ (ಶ್ರೀ ರಾಮಚಂದ್ರ ಭಂಜ್) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದೇ ಈ ಮಹಾ ದುರಂತಕ್ಕೆ ಕಾರಣ ಎನ್ನಲಾಗಿದೆ.

ಸೋಮವಾರ ಮುಂಜಾನೆ ಸುಮಾರು 2:59ರ ಸುಮಾರಿಗೆ ಇಡೀ ನಗರವೇ ಗಾಢ ನಿದ್ರೆಯಲ್ಲಿದ್ದಾಗ, ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಮತ್ತು ದಟ್ಟ ಹೊಗೆ ಇಡೀ ವಾರ್ಡ್ ಅನ್ನು ಆವರಿಸಿಕೊಂಡಿತು. ಆ ಸಮಯದಲ್ಲಿ ಐಸಿಯುವಿನಲ್ಲಿ ಸುಮಾರು 15 ಜನ ರೋಗಿಗಳು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಟ್ಟ ಹೊಗೆಯಿಂದಾಗಿ ರೋಗಿಗಳು ಉಸಿರುಗಟ್ಟುವಂತಾಯಿತು, ಹೊರಗೆ ಓಡಿ ಬರಲಾಗದ ಅಸಹಾಯಕ ಸ್ಥಿತಿಯಲ್ಲಿದ್ದ ರೋಗಿಗಳ ಕಿರುಚಾಟ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ | ಆಸ್ಪತ್ರೆಯಲ್ಲೇ ಅಕ್ರಮದ ಲೂಟಿ: ಡಾ. ಶಿವಲಿಂಗಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು!
ಆಸ್ಪತ್ರೆಯ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಈಗ ಗಂಭೀರ ಪ್ರಶ್ನೆಗಳು ಎದ್ದಿವೆ. ಶಾರ್ಟ್ ಸರ್ಕ್ಯೂಟ್ ಸಂಭವಿಸಲು ಕಾರಣವೇನು ಮತ್ತು ಆಸ್ಪತ್ರೆಯಲ್ಲಿ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿದ್ದವೇ ಎಂಬ ಬಗ್ಗೆ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ.










