ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಆಡಿದ ಮಾತುಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ. “ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಅವರು ನೀಡಿರುವ ಹೇಳಿಕೆಯು, ಅವರ ಬೆಂಬಲಿಗರು ಮತ್ತು ರಾಜಕೀಯ ವೀಕ್ಷಕರಲ್ಲಿ ಅಚ್ಚರಿ ಮೂಡಿಸಿದೆ.
ಬಮೂಲ್ ಕೆಲಸವೇ ಮುಖ್ಯ:
ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡುವ ಬದಲು, ಸದ್ಯ ತಾವು ನಿರ್ವಹಿಸುತ್ತಿರುವ ಜವಾಬ್ದಾರಿಯ ಮೇಲೆ ಗಮನ ಹರಿಸುವುದಾಗಿ ಅವರು ತಿಳಿಸಿದ್ದಾರೆ. “ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಹಾಲು ಮಾರುವ ಕೆಲಸ ಕೊಟ್ಟಿದ್ದಾರೆ, ಅದನ್ನು ಮಾಡುತ್ತಿದ್ದೇನೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಕಳೆದ ವರ್ಷ ಜೂನ್ನಲ್ಲಿ ಬಮೂಲ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಅವರು ಸಹಕಾರಿ ರಂಗದಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ರೈತರ ಕಲ್ಯಾಣ ಮತ್ತು ಹೈನುಗಾರಿಕೆ ವಲಯದ ಅಭಿವೃದ್ಧಿಗೆ ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತಿರುವುದನ್ನು ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ | ಪವಿತ್ರಾ ಗೌಡಗೆ ಬಿಗ್ ಶಾಕ್: ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್!
ಡಿ.ಕೆ. ಸುರೇಶ್ ಅವರು ಇಂತಹ ಹೇಳಿಕೆಯನ್ನು ನೀಡುತ್ತಿರುವುದು ರಾಜಕೀಯ ತಂತ್ರಗಾರಿಕೆಯ ಭಾಗವೇ ಅಥವಾ ನಿಜಕ್ಕೂ ಅವರು ಸಕ್ರಿಯ ಚುನಾವಣಾ ರಾಜಕೀಯದಿಂದ ವಿಮುಖರಾಗಲು ನಿರ್ಧರಿಸಿದ್ದಾರೆಯೇ ಎಂಬುದು ಸದ್ಯದ ಪ್ರಶ್ನೆ. ಕಳೆದ ಲೋಕಸಭಾ ಚುನಾವಣೆಯ ನಂತರ ಅವರು ನೇರ ಚುನಾವಣಾ ರಾಜಕೀಯದಿಂದ ತುಸು ಅಂತರ ಕಾಯ್ದುಕೊಂಡಿದ್ದರೂ, ಪಕ್ಷ ಸಂಘಟನೆ ಮತ್ತು ಬಮೂಲ್ ನಂತಹ ಪ್ರಭಾವಿ ಸಂಸ್ಥೆಗಳ ಮೂಲಕ ತಮ್ಮ ಹಿಡಿತವನ್ನು ಮುಂದುವರೆಸಿದ್ದಾರೆ.











