ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!


ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಟಿಕೆಟ್ ಹಂಚಿಕೆ ಸಂಬಂಧ ಶುಕ್ರವಾರ ರಾತ್ರಿ ನಡೆದ ಹೈವೋಲ್ಟೇಜ್ ಸಭೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ರಾಜೀನಾಮೆ ಅಸ್ತ್ರ ಪ್ರಯೋಗಿಸುವ ಮೂಲಕ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಬೆದರಿಕೆ ಹಾಕಿದರಾ ಜಮೀರ್ ಅಹಮ್ಮದ್!?

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಈ ಬಾರಿ ಶಾಮನೂರು ಕುಟುಂಬದ ಬದಲಿಗೆ ಮುಸ್ಲಿಂ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು ಎಂಬುದು ಜಮೀರ್ ಅವರ ಬಲವಾದ ವಾದ. ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಎದುರೇ ಅಸಮಾಧಾನ ಹೊರಹಾಕಿರುವ ಜಮೀರ್, “ನಮ್ಮ ಸಮುದಾಯಕ್ಕೆ ನ್ಯಾಯ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಗುಡುಗಿದ್ದಾರೆ ಎನ್ನಲಾಗಿದೆ. ಅಬ್ದುಲ್ ಜಬ್ಬಾರ್ ಅಥವಾ ಸಾದಿಕ್ ಪೈಲ್ವಾನ್ ಅವರಿಗೆ ಟಿಕೆಟ್ ನೀಡಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.

ALSO READ :  "ರಿಪಬ್ಲಿಕ್ ಕನ್ನಡ"ದ ಮುಖ್ಯಸ್ಥರ ಹುದ್ದೆಯನ್ನು  ಅಜಿತ್ ಹನುಮಕ್ಕನವರ್  ನಿರಾಕರಿಸಿದ್ದೇಕೆ..? "ಸುವರ್ಣ"ದಲ್ಲಿಯೇ "ಶೋಭಾ" ಉಳಿಯಲಿಲ್ಲ ಏಕೆ.?!

ಇತ್ತ ಹಿರಿಯ ನಾಯಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಈಗಾಗಲೇ ನಾಮಪತ್ರ ಸಲ್ಲಿಸಿ ಅಖಾಡಕ್ಕಿಳಿದಿದ್ದಾರೆ. ತಂದೆ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರು ಸಮರ್ಥ್ ಪರವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. “ಕ್ಷೇತ್ರದಲ್ಲಿ ಶಾಮನೂರು ಕುಟುಂಬದ ಹಿಡಿತವಿದೆ, ಹೀಗಾಗಿ ನಮಗೇ ಬಿ-ಫಾರಂ ಸಿಗಬೇಕು” ಎಂಬುದು ಅವರ ವಾದ.

ಬಾಗಲಕೋಟೆಯಲ್ಲೂ ಟಿಕೆಟ್ ಗೊಂದಲ:

ಬಾಗಲಕೋಟೆಯಲ್ಲೂ ಮಾಜಿ ಸಚಿವ ಎಚ್.ವೈ. ಮೇಟಿ ಅವರ ಕುಟುಂಬದ ಸದಸ್ಯರ ನಡುವೆಯೇ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ ಮತ್ತು ಉಮೇಶ್ ನಡುವೆ ಹೈಕಮಾಂಡ್ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ | ಪ್ರಧಾನಿ ಮೋದಿ ಮನಗೆದ್ದ ಅಣ್ಣಾವ್ರ ಗಾಯನ: ‘ಶ್ರೀಕೃಷ್ಣದೇವರಾಯ’ ಚಿತ್ರದ ಹಾಡು ಹಂಚಿಕೊಂಡ ನಮೋ!

ಜಮೀರ್ ಅಹಮ್ಮದ್ ಅವರ ರಾಜೀನಾಮೆ ಬೆದರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಇಕ್ಕಟ್ಟು ತಂದಿದೆ. ಇಂದು (ಶನಿವಾರ) ಸಂಜೆಯೊಳಗೆ ಹೈಕಮಾಂಡ್ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.


Leave a Comment